ಚಾಮರಾಜನಗರ : ಸಚಿವ ಸಂಪುಟ ಸಭೆಯನ್ನು ಫೆಬ್ರವರಿ15ರಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಚಿವ ಸಂಪುಟ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,
ಈ ಮೊದಲು ಫೆಬ್ರವರಿ 13ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ 13, 14ರಂದು ಬೆಂಗಳೂರಿನಲ್ಲಿ ಗ್ಲೋಬಲ್ ಇನ್ವೆಸ್ಟ್ ರ್ ಮೀಟ್ ಇರುವುದರಿಂದ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ15ಕ್ಕೆ ನಿಗದಿ ಮಾಡಲಾಗಿದೆ ಎಂದರು.
ಸಚಿವ ಸಂಪುಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಲಾಗಿದೆ. ಇಲಾಖಾವಾರು ಅಧಿಕಾರಿಗಳು ಅಭಿವೃದ್ದಿ ಕೆಲಸಗಳ ಸಂಬಂಧ ಮಾಹಿತಿ ವಿವರಗಳನ್ನು ನೀಡಿದ್ದಾರೆ. ಈ ಕುರಿತು ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಪರಿಹಾರ ಕಲ್ಪಿಸಬೇಕಿದೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಭಿವೃದ್ದಿ ಸಂಬಂಧ ಏನೇನೂ ಸಾಧ್ಯವೋ ಅವೆಲ್ಲವನ್ನೂ ಮಾಡಲಿದ್ದೇವೆ ಎಂದು ತಿಳಿಸಿದರು.
ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರ ಅಹವಾಲುಗಳನ್ನು ಆಲಿಸಿ ಚರ್ಚೆ ನಡೆಸಿದರು.
Kshetra Samachara
07/01/2025 05:52 pm