ಚಾಮರಾಜನಗರ : ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಉಸ್ತುವಾರಿ ವಹಿಸಿಕೊಂಡಿರುವ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿಯೇ ಪಶು ವೈದರ ಕೊರತೆಯಿದೆ. ಹೀಗಾಗಿ ಮಹದೇಶ್ವರಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯೊಳಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಿದ್ದರೆ ಕಪ್ಪುಪಟ್ಟಿ ಪ್ರದರ್ಶಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು.
ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ತಹಸೀಲ್ದಾರ್ ಟಿ.ರಮೇಶ್ ಬಾಬು ಅಧ್ಯಕ್ಷತೆಯಲ್ಲಿ ನಡೆದ ರೈತರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ರೈತ ಮುಖಂಡರು ತಾಲ್ಲೂಕಿನ ಪಶು ಆಸ್ಪತ್ರೆಗಳಲ್ಲಿ ಪಶು ವೈದ್ಯರು ಮತ್ತು ಸಹಾಯಕರು ಇಲ್ಲದೆ ರೈತರಿಗೆ ತೊಂದರೆಯಾಗಿದೆ. ಸರ್ಕಾರ ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು. ರೈತ ಮುಖಂಡರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಪಶುಪಾಲನ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ತಾಲ್ಲೂಕಿಗೆ ಅಗತ್ಯವಿರುವ 98 ಹುದ್ದೆಗಳ ಪೈಕಿ 24 ಮಂದಿ ಕಾರ್ಯನಿರ್ವಹಿಸುತಿದ್ದಾರೆ. ಖಾಲಿ ಹುದ್ದೆಯನ್ನು ಸರ್ಕಾರ ನೇಮಕ ಮಾಡಬೇಕು ಎಂದು ಸಭೆಗೆ ತಿಳಿಸಿದರು.
ತಾಲೂಕಿನ ಓಂಕಾರ ಅರಣ್ಯ ಪ್ರದೇಶದ ವಲಯ ವ್ಯಾಪ್ತಿಯಲ್ಲಿ ಸುಮಾರು 24 ಕೀ.ಮಿ ರೈಲ್ವೆ ಬ್ಯಾರಿಕೇಡ್, ಆನೆಕಂದಕ ಮತ್ತು ಸೋಲಾರ್ ಸಿಸ್ಟಂ ಸರಿಪಡಿಸಿ, ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ರೈತ ಮುಖಂಡರು ಒತ್ತಾಯಿಸಿದರು.
ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟ ಜಾನುವಾರುಗಳಿಗೆ ಹಾಗೂ ಬೆಳೆ ನಷ್ಟಕ್ಕೆ ಅರಣ್ಯ ಇಲಾಖೆ ನಿಗದಿತ ಸಮಯದೊಳಗೆ ಸಮರ್ಪಕವಾಗಿ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಶಿವಪುರ ಮಹದೇವಪ್ಪ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ವನ್ಯಜೀವಿಗಳಿಂದ ಕಾಡಂಚಿನಗಳಲ್ಲಿ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಅರಣ್ಯಾಧಿಕಾರಿಗಳು ಆಗಿಂದಾಗ್ಗೆ ರೈತ ಮುಖಂಡರೊಂದಿಗೆ ಸಭೆ ನಡೆಸಿ, ಸಮಸ್ಯೆ ಪರಿಹರಿಸಲು ಮುಂದಾಗಬೇಕು. ಆದರೆ ಅವರು ಇದನ್ನು ಮಾಡುತ್ತಿಲ್ಲ. ಇದರಿಂದ ಕಾಡಂದಚಿನ ಗ್ರಾಮಸ್ಥರು ಸಮಸ್ಯೆ ಎದುರಿಸುತ್ತಿದ್ದಾರೆ. ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರು ರೈತರ ಸಭೆಗೆ ಹಾಜರಾಗಬೇಕು ಎಂದು ರೈತ ಮುಖಂಡರು ಪಟ್ಟುಹಿಡಿದರು. ರೈತ ಮುಖಂಡರ ಮನವಿಗೆ ಪ್ರತಿಕ್ರಿಯಿಸಿದ ತಹಸೀಲ್ದಾರ್ ಟಿ.ರಮೇಶ್ ಬಾಬು, ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದರು. ಇದರಿಂದ ಸಿಟ್ಟಿಗೆದ್ದ ರೈತ ಮುಖಂಡರು ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಸಭೆಗೆ ಬರಬಾರದು ಎಂಬ ನಿಯಮವಿದಿಯೇ ಎಂದು ಪ್ರಶ್ನಿಸಿದರು.
Kshetra Samachara
03/02/2025 04:53 pm