ಕೋಲಾರ : ಯುವಕರು ಮತ್ತು ವಿದ್ಯಾರ್ಥಿಗಳು ಧೂಮಪಾನ ,ಗುಟ್ಕಾ, ತಂಬಾಕು, ಗಾಂಜಾ, ಮದ್ಯ, ಹೆರಾಯಿನ್, ಕೊಕಾ ಮುಂತಾದ ಮಾದಕ ವಸ್ತುಗಳನ್ನು ಬಳಸುವ ದುಶ್ಚಟಗಳಿಂದ ದೂರವಿರುವ ಸಂಕಲ್ಪ ಮಾಡಿ, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕಾರಣರಾಗಿ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ್ ಎಸ್.ಹೊಸಮನಿ ಕರೆ ನೀಡಿದರು.
ನಗರದ ಎಸ್ಎಫ್ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಈ ಜಲ-ಈನೆಲ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಎಸ್ಎಫ್ಎಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದುಶ್ಚಟಗಳಿಂದ ದೂರವಿರಿ ಓದುವುದೇ ನಿಮ್ಮ ಗುರಿ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಾದಕ ವಸ್ತುಗಳ ನಿರ್ಮೂಲನೆ ,ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿದ ಅವರು, ಯುವಕರು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವ ಪ್ರಕರಣಗಳ ಬಗ್ಗೆ ಅರಿವುಂಟಾಗುವಂತೆ ಸಮಾಜಕ್ಕೆ ಸಂದೇಶಗಳನ್ನು ನೀಡುವಂತಾಗಬೇಕು ಎಂದರು.
ಚಾಕೋಲೇಟ್ಗಳಲ್ಲಿ ಹೇರಾಯಿನ್, ಕೋಕಾ, ಮುಂತಾದ ಅಮಲು, ನಿಶೆ ಬರುವ ವಸ್ತುಗಳನ್ನು ಮಿಶ್ರಣ ಮಾಡಿ ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಮಾದಕ ವ್ಯಸನಿಗಳನ್ನಾಗಿ ಮಾಡಿ ಕೊನೆಗೆ ಅವರನ್ನು ಸಮಾಜಘಾತುಕ, ಕಾನೂನು ಬಾಹಿರಾ ಕೃತ್ಯಗಳಲ್ಲಿ ತೊಡಗುವಂತೆ ಮಾಡುವ ಷಡ್ಯಂತ್ರ ನಡೆದಿದೆ ಎಂದು ವಿಷಾದಿಸಿದರು.
Kshetra Samachara
21/10/2024 07:08 pm