ನಂಜನಗೂಡು: ಸರ್ಕಾರ ಕೋಟ್ಯಾಂತರ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿದೆ. ಆದರೆ ನಿರ್ವಹಣೆ ಇಲ್ಲದೆ ನೀರಿನ ಘಟಕಗಳು ಪಾಳು ಬಿದ್ದು ಕೆಟ್ಟು ನಿಂತಿವೆ. ಇದರಿಂದ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಾಗಿದೆ.
ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವು ಸುಮಾರು 3 ಸಾವಿರ ಲೀಟರ್ ಸಾಮರ್ಥ್ಯವುಳ್ಳ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಐದು ರೂಪಾಯಿ ಕಾಯಿನ್ ಹಾಕಿ ನೀರು ತೆಗೆದು ಕೊಳ್ಳಲಾಗುತ್ತದೆ. ಘಟಕದಲ್ಲಿರುವ ವಸ್ತುಗಳು ತುಕ್ಕು ಹಿಡಿದು, ಕೆಟ್ಟು ನಿಂತು ಮೂರು ವರ್ಷಗಳು ಕಳೆಯುತ್ತಾ ಬಂದರೂ, ಅದನ್ನು ರಿಪೇರಿ ಮಾಡಿಸುವಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿಯ ಆಡಳಿತ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಇದರಿಂದ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಲ್ಲದೇ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕೂಡಲೇ ಕೆಟ್ಟು ನಿಂತಿರುವ ಘಟಕವನ್ನು ರಿಪೇರಿ ಮಾಡಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಿಎಂ ಸುಗಂಧರಾಜು ಪಬ್ಲಿಕ್ ನೆಕ್ಸ್ಟ್ ನಂಜನಗೂಡು.
PublicNext
11/01/2025 11:55 am