ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿ ಇನ್ನಿಬ್ಬರು ಗಾಯಗೊಂಡಿದ್ದಾರೆ.
ವೆಂಕಟಾಪುರ ಗ್ರಾಮದ ಯಲ್ಲಪ್ಪ ಹಿಪ್ಪಿಯವರ (48) ಎಂಬುವವರು ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಯಲ್ಲಪ್ಪ ಅವರ ಪತ್ನಿ ಹನುಮವ್ವ ಹಾಗೂ ಅವರ ಮಗಳು ಯಲ್ಲವ್ವ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ವೆಂಕಟಾಪುರ ಗ್ರಾಮದ ಗುಡಿಸಲೊಂದರಲ್ಲಿ ವಾಸವಾಗಿದ್ದ ಈ ಕುಟುಂಬದ ಮೇಲೆ ಪಕ್ಕದ ಮನೆಯ ಗೋಡೆ ಕುಸಿದು ಬಿದ್ದಿದೆ. ತಕ್ಷಣವೇ ಸ್ಥಳೀಯರು ಮೂವರನ್ನೂ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯೆಯೇ ಯಲ್ಲಪ್ಪ ಅಸುನೀಗಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಗೆ ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಶೀಲ್ದಾರ ದೊಡ್ಡಪ್ಪ ಹೂಗಾರ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಲ್ಲದೇ ಸರ್ಕಾರದಿಂದ ಆ ಕುಟುಂಬಕ್ಕೆ ಪರಿಹಾರ ದೊರಕಿಸುವ ಭರವಸೆ ನೀಡಿದರು.
ಸದ್ಯ ಧಾರವಾಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಗೋಡೆ ಕುಸಿದು ಬಿದ್ದು ಓರ್ವ ವ್ಯಕ್ತಿ ಅಸುನೀಗಿದ್ದಾನೆ. ಸಾರ್ವಜನಿಕರು ಕೂಡ ತಮ್ಮ ಎಚ್ಚರಿಕೆಯಲ್ಲಿ ತಾವಿರಬೇಕು ಎಂದು ಜಿಲ್ಲಾಡಳಿತ ಈಗಾಗಲೇ ಸೂಚನೆ ನೀಡಿದ್ದು, ಕೂಡಲೇ ಸಾರ್ವಜನಿಕರು ತಮ್ಮ ಸುರಕ್ಷತೆ ಬಗ್ಗೆ ಎಚ್ಚರ ವಹಿಸಲೇಬೇಕಿದೆ.
Kshetra Samachara
26/07/2024 10:48 pm