ಕುಂದಾಪುರ: ಬೈಂದೂರು ತಾಲೂಕು ಕಛೇರಿಯಲ್ಲಿ ಮಂಗಳವಾರ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಸಮಕ್ಷಮದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕಾಮಗಾರಿ ಪ್ರಗತಿಪರಿಶೀಲನಾ ಸಭೆ ನಡೆಯಿತು.
"ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ" ವತಿಯಿಂದ ನಡೆಯುತ್ತಿರುವ ಬೈಂದೂರು-ರಾಣೆಬೆನ್ನೂರು ನಡುವಿನ ರಾಷ್ಟ್ರೀಯ ಹೆದ್ದಾರಿ 766ಸಿ ರಸ್ತೆ ಕಾಮಗಾರಿಯ ನಿಧಾನಗತಿಯ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ರಾಘವೇಂದ್ರ ಅಧಿಕಾರಿಗಳಿಗೆ ಎಚ್ಚರಿಸಿದರು. ಹೆದ್ದಾರಿ ಕಾಮಗಾರಿಯಲ್ಲಿ ಆಗುತ್ತಿರುವ ಪ್ರತಿ ಹಂತದ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡು, ಕೆಲವು ಕಡೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ನಿಧಾನವಾಗುತ್ತಿರುವ ಕಾರಣ ಕಾಮಗಾರಿಯಲ್ಲಿ ವಿಳಂಬವಾಗುತ್ತಿರುವ ಕುರಿತು ಚರ್ಚೆ ನಡೆಸಲಾಯಿತು.
ಅರಣ್ಯ ಇಲಾಖೆಯಿಂದ ವಿಳಂಬ ಧೋರಣೆ ಅನುಸರಿಸದೇ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದ್ದು, ರಸ್ತೆ ಕಾಮಗಾರಿಯ ಗುಣಮಟ್ಟದಲ್ಲಿ ರಾಜಿಯಾಗದೇ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಸಂಪರ್ಕ ರಸ್ತೆ ನಿರ್ಮಿಸುವಂತೆ ಸಂಸದ ರಾಘವೇಂದ್ರ ಸೂಚಿಸಿದರು.
ಈ ಸಂದರ್ಭ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Kshetra Samachara
11/09/2024 12:21 pm