ಮುಲ್ಕಿ: ಮುಲ್ಕಿ ಹಾಗೂ ಮೂಡಬಿದ್ರೆ ತಾಲೂಕಿನಿಂದ ವಿವಿಧ ಇಲಾಖೆಗಳ ಸಹಭಾಗಿತ್ವದೊಂದಿಗೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಣಿಯು ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಮುಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿಯಿಂದ ಹಳೆಯಂಗಡಿಯ ಪಾವಂಜೆ ಸೇತುವೆಯವರಗೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಮಾಜಿ ಸಚಿವ ಅಭಯ ಚಂದ್ರ ಜೈನ್ ,ಮುಲ್ಕಿ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತಿತರರು ಸಂವಿದಾನ ಪಿತಾಮಹ ಡಾ. ಭೀಮರಾವ್ ಅಂಬೇಡ್ಕರ್ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಾರತದ ಸಂವಿಧಾನ ಪೀಠಿಕೆ ಓದುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಗೌರವ ಮೂಡಿಸುವ ದೃಷ್ಟಿಯಿಂದ ಸರಕಾರವು ಬೃಹತ್ ಮಾನವ ಸರಪಣಿ ಮುಖಾಂತರ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ . ಭಾರತದ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕಾಗಿದೆ ಎಂದರು.
ಬಳಿಕ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಅರಣ್ಯ ಇಲಾಖೆ ಸಹಯೋಗದೊಂದಿಗೆ ವನಮಹೋತ್ಸವ ಆಚರಣೆ ಮೂಲಕ ಬಪ್ಪನಾಡು ಸೇತುವೆ ಬಳಿಯಿಂದ ಪಾವಂಜೆ ಸೇತುವೆವರೆಗೆ ವಿವಿಧ ಸಂಘ ಸಂಸ್ಥೆಗಳ ಭಾರತ್ ಮಾತಾ ಕಿ ಜೈ ಘೋಷಣೆಯೊಂದಿಗೆ ಬೃಹತ್ ಮಾನವ ಸರಪಣಿ ನಡೆಯಿತು.
ಈ ಸಂದರ್ಭ ಮುಲ್ಕಿ ನಗರ ಪಂಚಾಯತಿ ಅಧ್ಯಕ್ಷ ಸತೀಶ್ ಅಂಚನ್, ಮುಖ್ಯಾಧಿಕಾರಿ ಮಧುಕರ್, ಮೂಡಬಿದ್ರೆ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಮುಖ್ಯಾಧಿಕಾರಿ ಇಂದು ಎಂ, ಉಪ ತಹಶೀಲ್ದಾರ್ ದಿಲೀಪ್ ರೋಡ್ಕರ್ ವಿವಿಧ ಇಲಾಖೆ ಅಧಿಕಾರಿಗಳು, ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
PublicNext
15/09/2024 02:59 pm