ನವದೆಹಲಿ : ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಅಧಿಕ ತೂಕ ಹೊಂದಿದ್ದ ಕಾರಣಕ್ಕೆ ಫೈನಲ್ ಪಂದ್ಯದಿಂದ ಅನರ್ಹಗೊಂಡು ಪದಕ ವಂಚಿತರಾಗಿದ್ದ ವಿನೇಶ್ ಫೋಗಟ್, ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ಈ ಬಗ್ಗೆ ಮನವಿ ಸಲ್ಲಿಸಿದ್ದರು. ಆದರೆ ವಿಚಾರಣೆ ನಡೆಸಿದ ನ್ಯಾಯಾಲಯ ವಿನೇಶ್ ಅವರ ಅನರ್ಹ ನಿರ್ಧಾರ ಸರಿಯಾಗಿದೆ ಎಂದು ತೀರ್ಪು ನೀಡಿತ್ತು.
ಆ ಬಳಿಕ ಕುಸ್ತಿಗೆ ವಿದಾಯ ಹೇಳಿದ್ದ ವಿನೇಶ್, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜೂಲಾನಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇದೀಗ ಚುನಾವಣಾ ಪ್ರಚಾರದ ವೇಳೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ವಿನೇಶ್ ಆರೋಪಗಳ ಸುರಿಮಳೆಗೈದಿದ್ದಾರೆ..
''ನಾನು ಒಲಿಂಪಿಕ್ಸ್ನಲ್ಲಿ ಅನರ್ಹಗೊಂಡ ನಂತರ ಭಾರತ ಸರ್ಕಾರ ಉದ್ದೇಶಪೂರ್ವಕವಾಗಿ ತನಗೆ ಸಹಾಯ ಮಾಡಲಿಲ್ಲ'' ಎಂದು ಹೇಳಿಕೊಂಡಿದ್ದರು. ಅಲ್ಲದೆ ನಾನು ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿದ್ದಾಗ ನನ್ನನ್ನು ನೋಡಲು ಬಂದಿದ್ದ ಪಿಟಿ ಉಷಾ ಅವರು, ನನ್ನ ಅನುಮತಿ ಇಲ್ಲದೆ ನನ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು ಎಂದು ಆರೋಪಿಸಿದ್ದರು.
ವಿನೇಶ್ ಅವರ ಈ ಹೇಳಿಕೆಯನ್ನು ಅಲ್ಲಗಳೆದಿರುವ ಭಾರತದ ಮಾಜಿ ಸಾಲಿಸಿಟರ್ ಜನರಲ್ ಹರೀಶ್ ಸಾಳ್ವೆ ಅವರು, ವಿನೇಶ್ ಅವರ ಈ ಪ್ರಕರಣದಲ್ಲಿ ಭಾರತ ಸರ್ಕಾರ ಯಾವುದೇ ಹಸ್ತಕ್ಷೇಪ ನಡೆಸಿಲ್ಲ ಎಂದಿದ್ದಾರೆ. ತಮ್ಮ ರಾಜಕೀಯ ಲಾಭಕ್ಕಾಗಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಾಗೆಯೇ ದೇಶದ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ವಿನೇಶ್ ಅವರನ್ನು ಒಲಿಂಪಿಕ್ಸ್ನಿಂದ ಅನರ್ಹಗೊಳಿಸಿದ್ದರ ವಿರುದ್ಧವಾಗಿ ಇದೇ ಹರೀಶ್ ಸಾಳ್ವೆ ಅವರು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ಆ ಬಗ್ಗೆ ಮಾತನಾಡಿರುವ ಸಾಳ್ವೆ, ‘ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಿನೇಶ್ ಅವರ ವಿರುದ್ಧ ತೀರ್ಪು ನೀಡಿದಾಗ ಈ ನಿರ್ಧಾರವನ್ನು ಸ್ವಿಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮುಂದಾಗಿತ್ತು. ಆದರೆ ಈ ಬಗ್ಗೆ ವಿನೇಶ್ ಯಾವುದೇ ರೀತಿಯಾಗಿ ಆಸಕ್ತಿ ತೋರಲಿಲ್ಲ. ಆದರೀಗ ವಿನೇಶ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಾಳ್ವೆ ಹೇಳಿಕೊಂಡಿದ್ದಾರೆ. ಸಾಳ್ವೆ ಅವರ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ.
PublicNext
15/09/2024 04:58 pm