ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಕಳೆದ ಹತ್ತು ವರ್ಷದಿಂದ ತ್ವರಿತ ಗತಿಯಲ್ಲಿ ಸಾಕಷ್ಟು ಕಾಮಗಾರಿಗಳು ನಡೆಯುತ್ತಿವೆ. ಮೊನ್ನೆಯಷ್ಟೇ ಎಎಸ್ಐ ಒಬ್ಬರು ಪ್ಲೈಓವರ್ ಕಾಮಗಾರಿ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಹೀಗಿದ್ದರೂ ಸ್ಥಳೀಯ ಸರ್ಕಾರಿ ಸಂಸ್ಥೆಗಳು ಮಾತ್ರ ತಮ್ಮ ಜವಾಬ್ದಾರಿಯನ್ನು ಮರೆತಿವೆ. ಅಲ್ಲದೇ ಇದುವರೆಗೂ ಇಷ್ಟೆಲ್ಲಾ ಕಾಮಗಾರಿಗಳು ನಡೆಯುತ್ತಿದ್ದರೂ ಸುರಕ್ಷತಾ ಕ್ರಮಗಳನ್ನು ಮಾತ್ರ ಪರಿಶೀಲನೆ ನಡೆಸಿಲ್ಲ.
ರಸ್ತೆಯಲ್ಲಿ ಸಾಗುತ್ತಿದ್ದಾಗ ಕಬ್ಬಿಣ ರಾಡ್ ಬಿದ್ದು ಪೊಲೀಸ್ ಅಧಿಕಾರಿಯೊಬ್ಬರು ಪ್ರಾಣ ಕಳೆದುಕೊಂಡ ದಾರುಣ ಘಟನೆಯ ನಂತರ ಪೊಲೀಸ್ ಇಲಾಖೆಯಿಂದ ನಿರ್ಮಾಣ ಸಂಸ್ಥೆ ತೀವ್ರ ಪರಿಣಾಮ ಎದುರಿಸುತ್ತಿದೆ. ಕಂಪನಿಯ ನಿರ್ಲಕ್ಷ್ಯವೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾರಣ ಎನ್ನಲಾಗಿದೆ. ಆದಾಗ್ಯೂ, ಈ ಘಟನೆಯು ಹುಬ್ಬಳ್ಳಿ-ಧಾರವಾಡದಲ್ಲಿ ಒಂದು ದೊಡ್ಡ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ, ಅಲ್ಲಿ ಫ್ಲೈಓವರ್ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳು ಪ್ರಸ್ತುತ ಪ್ರಗತಿಯಲ್ಲಿವೆ. ಈ ಯೋಜನೆಗಳ ಮೇಲ್ವಿಚಾರಣೆಯ ಜವಾಬ್ದಾರಿಯುತ ಅಧಿಕಾರಿಗಳು, ಒಳಗೊಂಡಿರುವ ನಿರ್ಮಾಣ ಕಂಪನಿಗಳಿಂದ ಸರಿಯಾದ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸಿದ್ದಾರೆ.
ಈ ನಿರ್ಮಾಣ ಸ್ಥಳಗಳಲ್ಲಿ ಸುರಕ್ಷತಾ ನಿಯಮಗಳನ್ನು ಜಾರಿಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ಸ್ಥಳೀಯ ಅಧಿಕಾರಿಗಳು ವಿಫಲವಾದ ಕಾರಣ ಈಗ ವಿನಾಶಕಾರಿ ಜೀವಹಾನಿ ಉಂಟಾಗಿದೆ. ಹೀಗಿದ್ದರೂ ಯಾವೊಬ್ಬ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸುತ್ತಿಲ್ಲ. ಮತ್ತೊಂದು ಜೀವ ಹಾನಿಯಾದಾಗಲೇ ಎಚ್ಚೇತ್ತುಕೊಳ್ಳುವುದು ಖಚಿತ. ಒಂದು ಮನೆ ನಿರ್ಮಾಣ ಮಾಡುವಾಗ ಅನುಮತಿ ನೀಡಬೇಕಾದ ಅಧಿಕಾರಿಗಳು ಸುರಕ್ಷತಾ ಕ್ರಮಗಳ ಬಗ್ಗೆ ಸೂಚನೆ ನೀಡುತ್ತಾರೆ. ಆದರೆ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಅದೆಷ್ಟೋ ಕಾಮಗಾರಿ ನಡೆದರೂ ಒಬ್ಬೇ ಒಬ್ಬ ಅಧಿಕಾರಿಗಳು ಕೂಡ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಒಟ್ಟಿನಲ್ಲಿ ಪೊಲೀಸ್ ಅಧಿಕಾರಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 11ಜನರನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸ್ ಅಧಿಕಾರಿಯ ಸಾವಿಗೆ ಗುತ್ತಿಗೆ ಪಡೆದಿರುವ ಕಂಪನಿ ಮಾತ್ರವೇ ಹೊಣೆಗಾರರೋ ಅಥವಾ ನಿರ್ಲಕ್ಷ್ಯ ತೋರಿದ ಸ್ಥಳೀಯ ಆಡಳಿತ ವ್ಯವಸ್ಥೆಯೂ ಹೊಣೆಯಾಗುತ್ತದೆಯೋ..? ಎಂಬುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.
-ಮಲ್ಲೇಶ ಸೂರಣಗಿ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
16/09/2024 09:12 pm