ಮಂಗಳೂರು: ನಗರದ ಕದ್ರಿ ಪಾರ್ಕ್ನಲ್ಲಿ ರಾಜ್ಯದ 2ನೇ ಅತಿ ಎತ್ತರದ ಮತ್ತು ದ.ಕ.ಜಿಲ್ಲೆಯ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಉದ್ಘಾಟನೆಗೊಂಡಿತು.
ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ಈ ಧ್ವಜಸ್ತಂಭ ನಿರ್ಮಾಣಗೊಂಡಿದೆ. 75 ಮೀ. ಎತ್ತರದ ಈ ಧ್ವಜಸ್ತಂಭ ರಾಜ್ಯದ 2ನೇ ಅತಿ ಎತ್ತರದ ಮತ್ತು ದ.ಕ.ಜಿಲ್ಲೆಯ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಎಂಬ ಹೆಗ್ಗಳಿಕೆ ಹೊಂದಿದೆ. ಧ್ವಜಸ್ತಂಭ ಕಟ್ಟೆ, ಬೆಳಕಿನ ವ್ಯವಸ್ಥೆ ಹೊಂದಿರಲಿದೆ. ರಾಜ್ಯದಲ್ಲಿ ಬೆಳಗಾವಿಯಲ್ಲಿ 110 ಮೀ. ಅತೀ ಎತ್ತರದ ರಾಷ್ಟ್ರ ಧ್ವಜಸ್ತಂಭವಿದೆ.
ಧ್ವಜಸ್ತಂಭವನ್ನು ಉದ್ಘಾಟಿಸಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದೆ. ಇದರೊಂದಿಗೆ ಭಾರತೀಯತೆಯ ಗರ್ವ ಇಮ್ಮಡಿಯಾಗಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ ಸ್ವಾಭಿಮಾನದ ಸಂಕೇತ ಎಂದು ಹೇಳಿದರು.
ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಭರತ್ ಕುಮಾರ್, ವರುಣ್ ಚೌಟ, ಗಣೇಶ್ ಕುಲಾಲ್, ಪಾಲಿಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಸ್ಥಳೀಯ ಮನಪಾ ಸದಸ್ಯೆ ಶಕೀಲ ಕಾವ, ಮಾಜಿ ಮೇಯರ್ ಜಯಾನಂದ ಅಂಚನ್, ಭಾಸ್ಕರ್ ಕೆ., ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್ ಮತ್ತಿತರರು ಉಪಸ್ಥಿತರಿದ್ದರು.
PublicNext
19/09/2024 12:49 pm