ಬೆಂಗಳೂರು: ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ನಾಳೆ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಲಿದೆ.
ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ನಿಯೋಗ ಹರಿದ್ವಾರ ಮತ್ತು ವಾರಣಾಸಿಗೆ ಎರಡು ದಿನಗಳ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ.
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಲಿ ಎಂಬ ಆಶಯಕ್ಕಾಗಿ ರಾಜ್ಯದ ಇತಿಹಾಸದಲ್ಲೇ ಪ್ರಥಮಬಾರಿಗೆ ಕಾವೇರಿ ನದಿಗೆ ಗಂಗಾ ಆರತಿ ಮಾದರಿ ಕಾವೇರಿ ಆರತಿ ಮಾಡುವ ಕಾರ್ಯಕ್ರಮ ಆಯೋಜಿಸುವುದಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಘೋಷಣೆ ಮಾಡಿದ್ದರು.
ಹರಿದ್ವಾರ ಮತ್ತು ಮತ್ತು ವಾರಣಾಸಿಯಲ್ಲಿ ಗಂಗಾ ನದಿಗೆ ಆರತಿ ಮಾಡುವದನ್ನು ವೀಕ್ಷಿಸಿ ಸಮಗ್ರವಾಗಿ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಲು ಸಚಿವ ಚಲುವರಾಯಸ್ವಾಮಿ ಅವರ ಆಧ್ಯಕ್ಷತೆಯಲ್ಲಿ ಶಾಸಕರು, ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿತ್ತು. ಇದೀಗ ಸಮಿತಿ ಸದಸ್ಯರು ಅಧ್ಯಯನ ಪ್ರವಾಸಕ್ಕೆ ತೆರಳಿದ್ದಾರೆ.
ನಿಯೋಗವು ಸೆಪ್ಟೆಂಬರ್ 20ರ ಶುಕ್ರವಾರ ರಾತ್ರಿ ಹರಿದ್ವಾರದಲ್ಲಿ ಗಂಗಾ ನದಿಗೆ ಆರತಿ ಮಾಡುವುದನ್ನು ವೀಕ್ಷಣೆ ಮಾಡಲಿದೆ. ಸೆಪ್ಟೆಂಬರ್ 21ರ ಶನಿವಾರದಂದು ವಾರಣಾಸಿಗೆ ತೆರಳಿ ಗಂಗಾ ಆರತಿಗೆ ಅತ್ಯಂತ ಪ್ರಸಿದ್ಧ ಹಾಗೂ ಪವಿತ್ರ ಘಾಟ್ ಆದ ದಶಾಸ್ವಮೇಧ ಘಾಟ್ನಲ್ಲಿ ಗಂಗಾ ಆರತಿಯನ್ನು ವೀಕ್ಷಣೆ ಮಾಡಲಿದೆ. ಸೆಪ್ಟೆಂಬರ್ 22ರ ಭಾನುವಾರ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವುದರ ಜೊತೆಗೆ ಘಾಟ್ ನಲ್ಲಿ ಸಂಚರಿಸಿ, ಅಲ್ಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಕ್ಕೆ ವಾಪಸಾಗಲಿದೆ.
PublicNext
19/09/2024 09:53 pm