ಮೈಸೂರು: ದಸರಾ ಜಂಬೂ ಸವಾರಿ ಸಂದರ್ಭದಲ್ಲಿ ಪತ್ರಿಕಾ ಛಾಯಾಗ್ರಾಹಕರ ಮೇಲೆ ದುಂಡಾವರ್ತನೆ ಎಸಗಿದ ಪೊಲೀಸ್ ಸಿಬ್ಬಂದಿಗಳ ಅಮಾನತ್ತಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಒತ್ತಾಯಿಸಿದ್ದಾರೆ.
ನೆನ್ನೆ ನಡೆದ ನಾಡಹಬ್ಬ ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗಳು ಗೂಂಡಾಗಳಂತೆ ವರ್ತಿಸಿ, ಪತ್ರಿಕೆಯೊಂದರ ಹಿರಿಯ ಛಾಯಾಗ್ರಾಹಕ ಹೆಚ್.ಕೆ. ಚಂದ್ರು ಅವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿರುವುದು ಖಂಡನೀಯ.
ವಿಶ್ವ ವಿಖ್ಯಾತ ದಸರಾ ಉತ್ಸವದ ಯಶಸ್ವಿಗೆ ಕಳೆದ ಎರಡು ತಿಂಗಳಿನಿಂದ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮದ ಪ್ರತಿನಿಧಿಗಳನ್ನು ಪೊಲೀಸ್ ಸಿಬ್ಬಂದಿಗಳು ಅಮಾನವೀಯವಾಗಿ ನಡೆಸಿಕೊಂಡಿರುವುದು ಜಿಲ್ಲಾಡಳಿತ ಮತ್ತು ಸರಕಾರಕ್ಕೆ ಶೋಭೆ ತರುವ ವಿಷಯವಲ್ಲ. ಇದು ಮಾಧ್ಯಮ ಸಮುದಾಯಕ್ಕೆ ಮಾಡಿದ ಅಪಮಾನವಾಗಿದೆ. ಈ ಕೃತ್ಯವನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಉಗ್ರವಾಗಿ ಖಂಡಿಸುತ್ತದೆ.
ಆದ್ದರಿಂದ ಜಂಬೂ ಸವಾರಿಯ ದಿನ ಅರಮನೆಯ ಆವರಣದಲ್ಲಿ ಪತ್ರಿಕಾ ಛಾಯಾಗ್ರಾಹಕರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಪೊಲೀಸ್ ಸಿಬ್ಬಂದಿಗಳನ್ನು ಕೂಡಲೆ ಅಮಾನತ್ತುಗೊಳಿಸಿ ಶಿಸ್ತು ಕ್ರಮ ಜರುಗಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್. ಸಿ. ಮಹಾದೇವಪ್ಪ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮತ್ತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ದೂರು ನೀಡಿದ್ದಾರೆ.
PublicNext
13/10/2024 06:39 pm