ಚಾಮರಾಜನಗರ : ಒಳ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಚಾಮರಾಜನಗರದಲ್ಲಿ ಬೃಹತ್ ಪಾದಯಾತ್ರೆ ನಡೆಯಿತು.
ಚಾಮರಾಜನಗರ ತಾಲೂಕಿನ ಮಾದಾಪುರದಿಂದ ಹೊರಟ ಬೃಹತ್ ಪಾದಯಾತ್ರೆ ಚಾಮರಾಜನಗರದ ಸಂತೇಮರಹಳ್ಳಿ ವೃತ್ತಕ್ಕೆ ಆಗಮಿಸಿ, ಡಿವಿಎಸನ್ ರಸ್ತೆ ಮೂಲಕ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ತೆರಳಿ ಜಿಲ್ಲಾಡಳಿತ ಭವನ ತಲುಪಿತು. ಅಲ್ಲಿಯು ಕೆಲಕಾಲ ಪ್ರತಿಭಟನೆ ನಡೆಸಿ ಒಳ ಮೀಸಲಾತಿ ಜಾರಿಯಾಗಲಿ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಮಾಡಲು ಆಯಾಯ ರಾಜ್ಯಗಳಿಗೆ ಪರಮಾಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅದರಂತೆ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಸಮುದಾಯವು 30 ವರ್ಷಗಳಿಂದ ಒಳ ಮೀಸಲಾತಿಗಾಗಿ ಹೋರಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಂಧ್ವ ನೀತಿ ಅನುಸರಿಸದೆ ಕೂಡಲೇ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ, ಒಳ ಮೀಸಲಾತಿ ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರ ಒತ್ತಾಯಿಸಿದರು.
Kshetra Samachara
15/10/2024 02:56 pm