ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರಂಭವಾಗುವ ಮೊದಲೇ ರಾಜಕಾಲುವೆ ಸ್ವಚ್ಛಗೊಳಿಸುವ ಕೆಲಸ ಮಾಡಲು ಬಿಬಿಎಂಪಿಗೆ ಹಣ ನೀಡದೇ ಬ್ರ್ಯಾಂಡ್ ಬೆಂಗಳೂರು ಎಂದರೆ ಪ್ರಯೋಜನವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಳೆಯಿಂದ ಭಾರಿ ಹಾನಿಯಾಗುತ್ತಿದೆ. ಈ ಬಗ್ಗೆ ಅನೇಕ ವರದಿಗಳು ಕೂಡ ಇವೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಸುಮಾರು 800 ಕೋಟಿ ರೂಪಾಯಿ ಖರ್ಚು ಮಾಡಿ ರಾಜಕಾಲುವೆ ಸರ್ವೇ ಮಾಡಿಸಿ ಕೆಲಸ ಪ್ರಾರಂಭ ಮಾಡಿದ್ದೆ. ಆ ಕೆಲಸವನ್ನು ಈಗಿನ ಸರ್ಕಾರ ಸಮರ್ಪಕವಾಗಿ ಮಾಡುತ್ತಿಲ್ಲ. ಮಳೆ ಬಂದಾಗ ಓಡಾಡುವುದಕ್ಕಿಂತ, ಮಳೆ ಶುರುವಾಗುವ ಮೊದಲೇ ಕಾಲುವೆ ಸ್ವಚ್ಛಗೊಳಿಸುವ ಕೆಲಸ ಆಗಬೇಕು. ಬೆಂಗಳೂರಿನ ಉತ್ತರ ಭಾಗದಲ್ಲಿ ಯಲಹಂಕದಲ್ಲಿ ಕೆರೆಗಳು ತುಂಬಿ ತಗ್ಗು ಪ್ರದೇಶದಲ್ಲಿ ಜಲಾವೃತವಾಗುತ್ತದೆ. ಅದನ್ನು ತಪ್ಪಿಸಲು ಕಾಲುವೆಗಳ ನಿರ್ಮಾಣ ಮಾಡಬೇಕು. ಕೆರೆ ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಿದ್ದಾರೆ. ಅದನ್ನು ತೆರವುಗೊಳಿಸುವ ಕಾರ್ಯ ಆಗಬೇಕು. ಅದೇ ರೀತಿ ದಕ್ಷಿಣದಲ್ಲಿ ಹೆಚ್ಚು ಸಮಸ್ಯೆ ಆಗುತ್ತಿದೆ. ತಗ್ಗು ಪ್ರದೇಶದ ಬಗ್ಗೆ ಗಮನ ಹರಿಸದೇ ಇದ್ದರೆ ಸಮಸ್ಯೆ ಆಗುತ್ತದೆ. ಈ ಕೆಲಸ ಮಾಡದೇ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಮಾತನಾಡಿದರೆ ಪ್ರಯೋಜನವಿಲ್ಲ. ನಾವು ಇದ್ದಾಗ ಅವರು ಟೀಕೆ ಮಾಡುತ್ತಿದ್ದರು. ಈಗ ಅವರು ಅಧಿಕಾರಕ್ಕೆ ಬಂದಿದ್ದಾರೆ. ಈಗಿನ ಸಚಿವರು ಟೀಕೆಯನ್ನೇ ಮಾಡಬಾರದು ಎಂದು ಹೇಳುತ್ತಾರೆ. ಒಂದು ಸರ್ಕಾರ ತಾನೇ ತಿಳಿದು ಕೆಲಸ ಮಾಡಬೇಕು. ಇಲ್ಲದಿದ್ದರೆ ಪ್ರತಿಪಕ್ಷ ಹೇಳಿದಾಗಾದರೂ ಕೆಲಸ ಮಾಡಬೇಕು ಎಂದರು.
PublicNext
16/10/2024 05:40 pm