ಉಳ್ಳಾಲ: ವಾಹನಗಳ ನಡುವೆ ನಡೆದ ಅಪಘಾತದಲ್ಲಿ ವಿಭಿನ್ನಕೋಮಿನ ಚಾಲಕರಿಬ್ಬರ ಮಧ್ಯೆ ನಡೆದ ಹೊಯ್ ಕೈ ಪ್ರಕರಣವು ಉಳ್ಳಾಲ ಠಾಣೆಯ ಮೆಟ್ಟಿಲೇರಿತ್ತು. ಇದರ ಮಾತುಕತೆಗೆ ತೆರಳಿದ್ದ ಬಜರಂಗದಳ ಮುಖಂಡನ ಮೇಲೆ ಪೊಲೀಸ್ ಇನ್ಸ್ಪೆಕ್ಟರ್ ಕೊಠಡಿಯೊಳಗೆ ಅನ್ಯಮತೀಯನೊಬ್ಬ ಹಲ್ಲೆಗೈದ ಘಟನೆ ಗುರುವಾರ ರಾತ್ರಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಜರಂಗದಳದ ಉಳ್ಳಾಲ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಹಲ್ಲೆಗೊಳಗಾದವರು. ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕಡಂಬಾರು ಸರಕಾರಿ ಶಾಲೆಯ ಬಳಿಯ ನಿವಾಸಿ ಮಹಮ್ಮದ್ ಆಸಿಫ್(33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಬುಧವಾರ ರಾತ್ರಿ 9.45ರ ವೇಳೆಗೆ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ಮಧ್ಯೆ ಅಪಘಾತವಾಗಿತ್ತು. ಈ ವೇಳೆ ಖಲೀಲ್ ಮತ್ತು ಆತನ ಸಹೋದರ ಆಸೀಫ್ ಸೇರಿ ಶರತ್ ಎಂಬವರಿಗೆ ಹಲ್ಲೆಗೈದಿದ್ದರು ಎನ್ನಲಾಗಿತ್ತು.
ರಾತ್ರಿ 11 ಗಂಟೆ ಸುಮಾರಿಗೆ ಶರತ್ ಅವರ ಪರಿಚಯದ ಅರ್ಜುನ್ ಮಾಡೂರು ತನ್ನ ಸ್ನೇಹಿತರೊಂದಿಗೆ ಉಳ್ಳಾಲ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಇನ್ಸ್ಪೆಕ್ಟರ್ ಕೊಠಡಿಯೊಳಗೆ ಅಪಘಾತದ ವಿಚಾರದಲ್ಲಿ ಕಾರು ಚಾಲಕರಾದ ಶರತ್, ಖಲೀಲ್ರೊಂದಿಗೆ ಮಾತುಕತೆ ನಡೆಸುತ್ತಿದ್ದ ವೇಳೆ ಏಕಾಏಕಿ ಒಳನುಗ್ಗಿದ ಆರೋಪಿ ಆಸಿಫ್, ಅರ್ಜುನ್ ಮಾಡೂರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತೆ ಹಲ್ಲೆ ನಡೆಸಿದ್ದಾನೆ. ಪೊಲೀಸರು ತಕ್ಷಣ ಆತನನ್ನು ಬಂಧಿಸಿದ್ದಾರೆ. ಘಟನೆಯ ದೃಶ್ಯಗಳು ಇನ್ಸ್ ಪೆಕ್ಟರ್ ಕೊಠಡಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಹಲ್ಲೆಗೊಳಗಾದ ಅರ್ಜುನ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಹಲ್ಲೆಗೈದ ಆಸಿಫ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಮಧ್ಯರಾತ್ರಿ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಅರ್ಜುನ್ಗೆ ಹಲ್ಲೆ ನಡೆಸಿದ ಆರೋಪಿ ಆಸಿಫ್ನನ್ನ ತಮ್ಮ ವಶಕ್ಕೆ ನೀಡುವಂತೆ ಆಗ್ರಹಿಸಿದ್ದಾರೆ.
Kshetra Samachara
17/10/2024 05:02 pm