ಬೆಂಗಳೂರು: ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು, ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಬಳಿಕ ಶಿವಕುಮಾರ್ ಮಾತನಾಡಿ, ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಈಗ ಚುನಾವಣಾ ನೀತಿ ಸಂಹಿತೆ ಇದೆ. ಇದಾದ ನಂತರ ಸಭೆ ಕರೆದು ಮಾತನಾಡುತ್ತೇವೆ ಎಂದು ಸಮುದಾಯದ ಮುಖಂಡರುಗಳಿಗೆ ಗೌರವಯುತವಾಗಿ ಹೇಳಿದ್ದೇವೆ. ಅವರ ಭಾವನೆ, ಕಳಕಳಿ ನಮಗೆ ಅರ್ಥವಾಗುತ್ತದೆ. ಮುಂದಿನ ದಿನಗಳಲ್ಲಿ ನಾವು ಅವರ ವಿಚಾರವನ್ನು ಪರಿಗಣಿಸುತ್ತೇವೆ ಎಂದು ತಿಳಿಸಿದರು. ತಮ್ಮ ಹೋರಾಟ ಮುಂದುವರಿಸುತ್ತೇವೆ ಎಂದು ಸಮುದಾಯದವರು ಹೇಳಿರುವ ಬಗ್ಗೆ ಕೇಳಿದಾಗ, “ಹೋರಾಟ ಮಾಡುವವರಿಗೆ ನಾವು ಏನು ಹೇಳಲು ಆಗುತ್ತದೆ" ಎಂದು ತಿಳಿಸಿದರು.
PublicNext
18/10/2024 05:38 pm