ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಕರೆಯಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನೇತಾಜಿ ಸುಭಾಷ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನಡೆಸಲಾಗುತ್ತದೆ. ನಾಡಿನ ಸಂಸ್ಕೃತಿ, ಭಾಷೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳೊಂದಿಗೆ ನಗರದ ತಹಶೀಲ್ದಾರ್ ಕಚೇರಿಯಿಂದ ಜಿಲ್ಲಾ ಆಟದ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿಗಳಿಂದ ಕನ್ನಡ ಸಮೂಹ ಗೀತ ಗಾಯನ ನಡೆಯಲಿದ್ದು, ಸಂಜೆ ನಗರದ ಕುವೆಂಪು ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.ರಾಜ್ಯೋತ್ಸವ ಆಚರಣೆಗೆ ಪ್ರತಿಯೊಬ್ಬರ ಸಹಕಾರ ಅವಶ್ಯಕ ಎಲ್ಲಾ ಕನ್ನಡ ಪರ ಸಂಘಟನೆಗಳು ಸಹಕರಿಸಬೇಕು. ಸರ್ಕಾರಿ ನೌಕರರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
PublicNext
18/10/2024 05:48 pm