ಬೆಂಗಳೂರು: ಎಚ್.ಡಿ. ಕುಮಾರಸ್ವಾಮಿ ಅವರು ನನ್ನನ್ನು ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಮತ್ತು ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕುತ್ತಿದ್ದಾರೆ. ನನ್ನ ಎಲ್ಲಾ ದಾಖಲೆಗಳು ಇಡಿ ಸಿಬಿಐ ಬಳಿ ಇವೆ. ಹೊಸದಾಗಿ ಹುಡುಕುವುದೇನಿಲ್ಲ. ಅವರು ನನಗೆ ಕೇಳಿದ್ದರೆ ನಾನೇ ಅವರಿಗೆ ನನ್ನ ದಾಖಲೆಗಳನ್ನು ಒದಗಿಸುತ್ತಿದ್ದೆ. ಆದ್ರೆ ಕೆಲ ಅಧಿಕಾರಿಗಳಿಗೆ ಫೋನ್ ಮಾಡಿ ದಾಖಲೆ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.
ಮೂಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಇಡಿ ದಾಳಿಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ ಇಡಿ ಅವರು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ. ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು. ಅದಕ್ಕಿಂತ ಹೆಚ್ಚಾಗಿ ಇನ್ನೇನು ಮಾಡಲು ಸಾಧ್ಯ? ದಾಖಲೆಗಳನ್ನು ಹೊಸದಾಗಿ ತಿದ್ದಲು ಸಾಧ್ಯವೇ? ಪ್ರಕರಣದ ಎಲ್ಲಾ ದಾಖಲೆಗಳು ಸಾರ್ವಜನಿಕವಾಗಿವೆ. ನಾವು ಕಾನೂನು ರೀತಿಯ ಹೋರಾಟ ಮಾಡುತ್ತೇವೆ. ವಾಸ್ತವಾಂಶ ಜನರ ಮುಂದಿಡುತ್ತೇವೆ ಎಂದರು.
ಈ ಪ್ರಕರಣ ನ್ಯಾಯಾಲಯದಲ್ಲಿದೆ, ಅವರು ಮೂಡಾ ಕಚೇರಿಗೆ ಭೇಟಿ ನೀಡಿದ್ದಾರೆ. ನನಗೆ ಬಂದ ಮಾಹಿತಿ ಪ್ರಕಾರ ಇಡಿ ಅವರು ದಾಖಲೆಗಳನ್ನು ಕೇಳಿದ್ದರು, ಇವರು ದಾಖಲೆ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ. ದಾಖಲೆ ನೀಡುವುದು ತಡವಾಗಿರಬಹುದು, ಇದಕ್ಕಾಗಿ ಇಡಿ ಅವರೇ ಕಚೇರಿಗೆ ಹೋಗಿರಬಹುದು ಎಂದರು.
PublicNext
18/10/2024 06:06 pm