ಹುಬ್ಬಳ್ಳಿ: ಕಿಲ್ಲರ್ ಬೈಪಾಸ್ ಎಂದು ಕುಖ್ಯಾತಿಗೆ ಹೆಸರುವಾಸಿಯಾಗಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ನಲ್ಲಿ ಮತ್ತೆ ವಾಹನ ಸವಾರರ ಮರಣ ಮೃದಂಗ ಮುಂದುವರೆದಿದೆ. ಶನಿವಾರ ತಡರಾತ್ರಿ ಬೈಕ್ ಹಾಗೂ ಟವೇರಾ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೋರ್ವ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
SBI ಬ್ಯಾಂಕ್ ನಲ್ಲಿ ಕ್ರೆಡಿಟ್ ಕಾರ್ಡ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕುಂದಗೋಳ ಪಟ್ಟಣದ ಕುಂಬಾರ ಓಣಿಯ ನಿವಾಸಿಗಳಾದ ಶಿವರಾಜ ಹಾಗೂ ಗದಿಗೆಪ್ಪ ತಾರಿಹಾಳದಲ್ಲಿ ತಡರಾತ್ರಿ ಕೆಲಸ ಮುಗಿಸಿ ಬಿಡ್ನಾಳದಲ್ಲಿರುವ ತಮ್ಮ ಮನೆ ಕಡೆಗೆ ಹೊರಟಿದ್ದರು. ಈ ಸಂದರ್ಭದಲ್ಲಿ ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಟವೇರಾ ದಾರವಾತಿ ಹನುಮಂತನ ದೇವಸ್ಥಾನದ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಇನ್ಸ್ಪೆಕ್ಟರ್ ರಮೇಶ ಗೋಕಾಕ್ ಭೇಟಿ ನೀಡಿ ಅಪಘಾತವಾದ ಎರಡು ವಾಹನಗಳನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಕೂಡ ಇದೆ ಸ್ಥಳದಲ್ಲಿ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದರು.
ಆ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಅಪಘಾತವಾಗಿದ್ದು, ಸಹಜವಾಗಿ ಬೈಪಾಸ್ನಲ್ಲಿ ಓಡಾಡುವ ವಾಹನ ಸವಾರರಿಗೆ ಮೃತ್ಯು ರಸ್ತೆಯಾಗಿ ಪರಿಣಮಿಸಿದೆ. ಯಾರೋ ಮಾಡಿದ ತಪ್ಪಿಗೆ ಯಾರಿಗೋ ಶಿಕ್ಷೆ ಎಂಬತಾಗಿದೇ ಬೈಪಾಸ್ ರಸ್ತೆಯ ಕಥೆ ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನಹರಿಸಿ ವಾಹನ ಸವಾರರ ಜೀವ ಉಳಿಸುವ ಕಾರ್ಯವನ್ನು ಮಾಡಬೇಕಿದೆ.
ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/10/2024 01:44 pm