ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.
ಈ ಕುರಿತಂತೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು, ಜನವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಮೇಳದ ಉದ್ಘಾಟಿಸಲಿದ್ದಾರೆ. ಸರ್ಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ.
2017ರಲ್ಲಿ ಆಯೋಜಿಸಿದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.2025ರ ಈ ಮೇಳವು ರೈತರು, ರೈತ ಗುಂಪುಗಳು, ದೇಶಿಯ ಮತ್ತು ಅಂತರರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಅನ್ವೇಷಿಸುವ ಮತ್ತು ಪರಿಣಾಮಕಾರಿಯಾಗಿ ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ವೇದಿಕೆಯಾಗಿದೆ.
ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ಬೆಂಗಳೂರಿನ ಹೆಬ್ಬಾಳದಲ್ಲಿ " ಸಾವಯವ ಮತ್ತು ಸಿರಿಧಾನ್ಯ ಹಬ್" ನ್ನು ರೂ. 20 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು,ಮುಖ್ಯ ಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುವರು ಎಂದರು.
Kshetra Samachara
20/01/2025 08:37 pm