ಚಾಮರಾಜನಗರ : ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕ್ರಮವನ್ನು ವಿರೋಧಿಸಿ ಕರ್ನಾಟಕ ಸೇನಾಪಡೆ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಾಯಿಕೊಡೆಗಳಂತೆ ಹುಟ್ಟಿಕೊಂಡಿದ್ದು, ಜನರಿಂದ ಹಣವನ್ನು ಸುಲಿಗೆ ಮಾಡುತ್ತಿವೆ. ಶೇ. 10 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಜನರಿಗೆ ಅಮಿಷವೊಡ್ಡಿ ಸಾಲ ನೀಡಿ, ಸಾಲ ಮರುಪಾವತಿ ವಿಳಂಬ ಮಾಡಿದರೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಮೂಲಕ ಕಿರುಕುಳ ನೀಡುತ್ತಿವೆ. ಫೈನಾನ್ಸ್ ಗಳ ಕಿರುಕುಳ ದಿಂದ ರಾಜ್ಯಾದ್ಯಂತ ಅನೇಕ ಕುಟುಂಬಗಳು ಆತ್ಮಹತ್ಯೆ ಮಾಡಿಕೊಂಡಿವೆ. ಸಾವಿರಾರು ಕುಟುಂಬಗಳು ಊರು ಬಿಟ್ಟಿದ್ದಾರೆ. ಅನೇಕ ಕುಟುಂಬಗಳು ತೊಂದರೆಗೆ ಸಿಲುಕಿವೆ. ಜನರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ವಿರುದ್ಧ ಮುಖ್ಯಮಂತ್ರಿ ಅವರು ಹಾಗೂ ಜಿಲ್ಲಾಧಿಕಾರಿ ಅವರು ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ನಿಂದ ಸಾಲ ಪಡೆದಿರುವ ಜನತೆ ಧೈರ್ಯದಿಂದ ಇರಬೇಕು. ನಿಮ್ಮೊಂದಿಗೆ ಜಿಲ್ಲಾಡಳಿತ, ಸರ್ಕಾರ ಮತ್ತು ಕನ್ನಡ ಸಂಘಟನೆಗಳಿವೆ. ಯಾರು ಊರು ತ್ಯೆಜಿಸುವುದುಬೇಡ, ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ರದ್ದುಪಡಿಸಿ, ಬ್ಯಾಂಕ್ ಮೂಲಕ ಸರಿಯಾದ ರೀತಿಯಲ್ಲಿ ಸಾಲ ಸೌಲಭ್ಯ ಕೊಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಚಾ.ರಂ.ಶ್ರೀನಿವಾಸಗೌಡ, ನಿಜಧ್ವನಿ ಗೋವಿಂದರಾಜು, ಪಣ್ಯದಹುಂಡಿ ರಾಜು, ನಂಜುಂಡಶೆಟ್ಟಿ, ವೀರಭದ್ರ, ಆಟೋ ನಾಗೇಶ್, ಶಿವಣ್ಣ, ಸಿದ್ದರಾಜು, ರಾಚಪ್ಪ ಸೇರಿದಂತೆ ಇತರರು ಇದ್ದರು.
PublicNext
24/01/2025 03:13 pm